Current AffairsSpardha Times

4ನೇ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ

Share With Friends

ಆಂಧ್ರಪ್ರದೇಶದ (Andhra Pradesh) ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು (Chandrababu Naidu), ಮಂತ್ರಿಯಾಗಿ ಪವನ್‌ ಕಲ್ಯಾಣ್‌ (Pawan Kalyan) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಜಯವಾಡದ ಕೇಸರಪಲ್ಲಿ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾರಾ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಅಬ್ದುಲ್ ನಜೀರ್ ಅವರು ಚಂದ್ರಬಾಬು ಅವರಿಗೆ ಪ್ರಮಾಣ ವಚನ ಬೋಧಿಸಿದರು. ಅಖಂಡ ಆಂಧ್ರಪ್ರದೇಶದಲ್ಲಿ ಎರಡು ಬಾರಿ ಹಾಗೂ ವಿಭಜಿತ ಆಂಧ್ರಪ್ರದೇಶದಲ್ಲಿ ಒಂದು ಬಾರಿ ಸಿಎಂ ಆಗಿ ಕಾರ್ಯನಿರ್ವಹಿಸಿದ ಅವರು ಇಂದು ನಾಲ್ಕನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸಚಿವರಾಗಿ ಕೊನಿಡೇಲ ಪವನ್ ಕಲ್ಯಾಣ್, ಕೊಲ್ಲು ರವೀಂದ್ರ ,ಅಚ್ಚೆನಾಯ್ಡು , ಚಂದ್ರಬಾಬು ಪುತ್ರ ನಾರಾ ಲೋಕೇಶ್ ಸೇರಿ ಒಟ್ಟು 24ಮಂದಿ ಪ್ರಮಾಣ ವಚನ ಸ್ವೀಕರಿಸಿದರು. ಚಂದ್ರಬಾಬು ನಾಯ್ಡು ಅವರು 1995 ರಿಂದ 1999, 2004 ರಿಂದ 2009 ಹಾಗೂ 2014ರಿಂದ 2019ರ ವರೆಗೆ ಒಟ್ಟು ಮೂರು ಬಾರಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. 2019ರ ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿ ಪಕ್ಷ ಸೋಲು ಕಂಡಿತ್ತು ಜಗನ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಏರಿತ್ತು.

ಪ್ರಚಲಿತ ಘಟನೆಗಳ ಕ್ವಿಜ್ (08-06-2024)

ಆಂಧ್ರಪ್ರದೇಶದಲ್ಲಿ ಮೇ 13ರಂದು ಲೋಕಸಭಾ ಚುನಾವಣೆಯ ಜೊತೆಯಲ್ಲೇ ವಿಧಾನಸಭೆಗೂ ಮತದಾನ ನಡೆದಿತ್ತು. ಈ ಚುನಾವಣೆಗೆ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಮೈತ್ರಿಮಾಡಿಕೊಂಡಿದ್ದವು. ವಿಧಾನಸಭೆಯ 175 ಸ್ಥಾನಗಳ ಪೈಕಿ ಟಿಡಿಪಿ 135, ಜನಸೇನಾ 21, ಬಿಜೆಪಿ 8 ಹಾಗೂ ವೈಎಸ್‌ಆರ್‌ಸಿಪಿ 11 ಸ್ಥಾನಗಳಲ್ಲಿ ಗೆಲುವು ಪಡೆದಿತ್ತು. 25 ಲೋಕಸಭಾ ಕ್ಷೇತ್ರಗಳ ಪೈಕಿ ಟಿಡಿಪಿ 16, ವೈಎಸ್‌ಆರ್‌ಸಿಪಿ 4, ಬಿಜೆಪಿ 3, ಜನಸೇನಾ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.

ಚಂದ್ರಬಾಬು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ಜೆಪಿ ನಡ್ಡಾ, ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ, ನಿತಿನ್ ಗಡ್ಕರಿ, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಾಜಿ ಸಿಜೆಐ ಎನ್‌ವಿ ರಮಣ, ಸೂಪರ್ ಸ್ಟಾರ್ ರಜನಿಕಾಂತ್, ಮೆಗಾಸ್ಟಾರ್ ಚಿರಂಜೀವಿ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content Copyright protected !!